Wednesday 19 March 2014

ಅಂತರಾಗ್ನಿ

ಅಂತರಾಗ್ನಿ


ಸಾಧನೆಯ ಅಂತರಾಗ್ನಿಯದು
ಬೇಕೆಂದು ಬದುಕಿಗೆ
ಸಾಧನೆಯೆ ಇಲ್ಲದಿಹುದೆಂಥ ಬದುಕು
ಸುತ್ತಲಿನ ಪರಿಸರದಿ ಸ್ಫೂರ್ತಿಯನು
ಪಡೆಯುತಲಿ ನೀ ಶ್ರಮಿಸು
ಪರಿಹರಿಸೆ ಅದರ ಹುಳುಕು

ಅದಿಕವಿ ಪಂಪ ತಾ ಭಾರತವ
ಬರೆದಾಗ ಕನ್ನಡದಿ
ಭಾರತದ ಕಾವ್ಯವಿರಲಿಲ್ಲ
ಸ್ಫೂರ್ತಿಯನು ತಾ ಪಡೆದು
ರಚಿಸಿರಲು ಕಾವ್ಯವನು
ಅದಿಕವಿ ತಾನಾಗಿ ಮೆರೆಯದಿರಲಿಲ್ಲ

ಪಂಪನಾ ಕಾವ್ಯವದು ಒರತೆಯಾಗುತ
ಹರಿದು ಮುಂದೆಲ್ಲ
ಹಲವಾರು ಕಾವ್ಯಗಳ ಕೂಡಿ
ಕಾಲನಾ ಹರಿವಿನಲಿ ಹಲವು
ಕಾವ್ಯಗಳೆಂಬ ಝರಿಗಳನು
ಸೇರುತಲಿ ನದಿಯಾಗಿ ಓಡಿ

ರನ್ನ ಜನ್ನರ ಪೊನ್ನ ಹರಿಹರರ
ಕಾವ್ಯಗಳು ಕನ್ನಡದ
ಸಾಹಿತ್ಯ ನದಿಗೆ ಸೇರುತಿರೆ
ಭಾರತಾಂಬೆಯಖಂಡ ಸಾಹಿತ್ಯ
ಸಾಗರದ ಮಡಿಲನ್ನು
ತಾವೆಂದು ತುಂಬಿ ಹರಿಸುತಿರೆ

ಭಾಷೆ ಹಲವಾರಿರಲು ಭರತ
ಖಂಡದ ತುಂಬ ನೀತಿ
ನಿಯಮಗಳೊಂದು ಹೊಂದಿ ಸೇರದಿರೆ
ಪಾಣಿನಿಯು ಇದಕಂಡು ವ್ಯಾಕರಣ
ರಚಿಸಿರಲು ಏಕತೆಯು
ವಿವಿಧತೆಯ ನಡುವೆ ಮೂಡುತಿರೆ

ಬಾಣಂತಿ ಜ್ವರದಿಂದ ಮಾತೆಯರು
ಅಸುನೀಗಿ ಹಸುಗೂಸುಗಳು
ಆಗೆ ತಬ್ಬಲಿಗಳು
ಇಗ್ನಾಜು ಫಿಲಿಪ ಸಮಲ್ವೈಸ
ಇದಕಂಡು ಮರುಗುತಲಿ
ದುಡಿದು ತಾ ಹಗಲು ಇರುಳು

ಸಂಕಲ್ಪವನು ತೊಟ್ಟು ನಿದ್ರೆ
ಊಟವ ಬಿಟ್ಟು ದುಡಿದಿರಲು
ಜ್ವರಕೆ ತಾ ಕಾರಣವನರಸಿ
ಕೈ ತೊಳೆದು ರೋಗಿಗಳ ಮುಟ್ಟುವುದೆ
ಇದಕೆಂದು ಪರಿಹಾರ
ಎಂಬಂಥ ಬೆಳಕು ಹರಿಸಿ

ಕತೃತ್ವ ಶಕ್ತಿಯದು ಪ್ರತಿಯೊಂದು
ಜೀವಿಯಲು ಅಡಗಿಹುದು
ಕಾಣದೆಯೆ ಸುಪ್ತವಾಗಿ
ಅಂತರಾಗ್ನಿಯ ಕಾವು ಸೋಕಿರಲು
ತಾ ಕರಗಿ ಹರಿಯುವುದು
ಹೊರಗಡೆಗೆ ವ್ಯಕ್ತವಾಗಿ

ನಿನ್ನೊಳಗೆ ಅದಗಿರುವ ಪ್ರತಿಭೆಗಳೆ
ಎಂದೆಂದು ಸಾಧನೆಗೆ
ಬೇಕಿರುವ ಪರಿಕರಗಳು
ಗುರು-ಮಿತ್ರ ತಂದೆ ತಾಯಿಯರು
ಪರಿಸರವು ನಿನ್ನ ಸಾಧನೆಗೆ
ವೇಗ ವರ್ಧಕಗಳು

ಮೈಕೊಡವಿ ಎದ್ದೇಳು ಭಯವನ್ನು
ಕೈಬಿಟ್ಟು ಉದ್ದೀಪಿಸು
ನಿನ್ನ ಅಂತರಾಗ್ನಿಯನ್ನು
ಉರಿವ ಹಣತೆಯ ತೆರದಿ ತೋರು ನೀ
ಬೆಳಕನ್ನು ವ್ಯರ್ಥ ಗೊಳಿಸದೆ
ನಿನ್ನ ಈ ಜೀವನವನು.

ಡಾ.ಸುದರ್ಶನ ಗುರುರಾಜರಾವ್







No comments:

Post a Comment